ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ದಂಪತಿ ಒಳಗೆ ಸಿಲುಕಿ ಸಜೀವ ದಹನ
ಆರು ಮಂದಿ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ದಂಪತಿ ಸಜೀವ ದಹನವಾಗಿರುವ ಘಟನೆ ಗುರುವಾರ ಕಣ್ಣೂರು ಇಲ್ಲಿನ ಜಿಲ್ಲಾ ಆಸ್ಪತ್ರೆ ಸಮೀಪ ನಡೆದಿದೆ
ಬೆಂಕಿ ಹೊತ್ತಿಕೊಂಡಾಗ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಗು ಸೇರಿದಂತೆ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮುಂದಿನ ಸೀಟಿನಲ್ಲಿ ಕುಳಿತಿದ್ದ ದಂಪತಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಸ್ಥಳೀಯರು ಕಾರಿನ ಮುಂದಿನ ಬಾಗಿಲು ತೆರೆಯಲು ಯತ್ನಿಸಿದ್ದಾರೆ. ಆದರೆ ಇಂಧನ ತೈಲದ
ಟ್ಯಾಂಕ್ ಸ್ಫೋಟದ ಭಯದಿಂದ ಅವರಿಗೆ ಒಳಗಿದ್ದ ದಂಪತಿ ಬದುಕಿಸಲು ಸಾಧ್ಯವಾಗಲಿಲ್ಲ ಎಂದು
ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
ದುರ್ಘಟನೆಯಲ್ಲಿ 35 ವರ್ಷದ ಪುರುಷ ಮತ್ತು 26 ವರ್ಷದ ಗರ್ಭಿಣಿ ಮಹಿಳೆ ಮೃತಪಟ್ಟಿದ್ದಾರೆ. ಗರ್ಭಿಣಿ ಮಹಿಳೆ ತಪಾಸಣೆಗಾಗಿ ಜಿಲ್ಲಾ ಆಸ್ಪತ್ರೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿದ ಕಣ್ಣೂರು ನಗರ ಪೊಲೀಸ್ ಕಮಿಷನರ್ ಅಜಿತ್ ಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ, 'ಹಿಂಬದಿಯಲ್ಲಿದ್ದ ಸಹ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಆದಾಗ್ಯೂ ಆರೋಗ್ಯ ಪರಿಶೀಲನೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದರು.
ಬೆಂಕಿ ಹೊತ್ತಿಕೊಂಡ ಕಾರಿನ ಮುಂಭಾಗದ ಬಾಗಿಲು ತೆರೆಯಲು ಸಾಧ್ಯವಾಗದ ಕಾರಣ ದಂಪತಿ ಒಳಗೆ ಸಿಲುಕಿ ಸಜೀವ ದಹನವಾಗಿದ್ದಾರೆ ಎಂದು ಅವರು ಹೇಳಿದರು.
ಘಟನೆಗೆ ಕಾರಣ ತಿಳಿದುಬಂದಿಲ್ಲ. ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Post a Comment