ಕೊನೆಗೂ ಕೇರಳಕ್ಕೆ ಅಪ್ಪಳಿಸಿದ ಮುಂಗಾರು..ಶೀಘ್ರದಲ್ಲಿ ಕರ್ನಾಟಕಕ್ಕೆ ಮಾನ್ಸೂನ್ ಪ್ರವೇಶ
ವಾಡಿಕೆಗಿಂತ ಈ ಬಾರಿ ಒಂದು ವಾರ ತಡವಾಗಿ ಕೇರಳಕ್ಕೆ ಮಾನ್ಸೂನ್ ಮಾರುತಗಳು ಅಪ್ಪಳಿಸಿದ್ದು, 48 ಗಂಟೆಯಲ್ಲಿ ಅಂದರೆ ಜೂನ್ 10 ಅಥವಾ 11ರಂದು ಕರ್ನಾಟಕಕ್ಕೆ ಮಾನ್ಸೂನ್ ಪ್ರವೇಶ ಮಾಡಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಭಾರತೀಯ ಹವಾಮಾನ ಇಲಾಖೆ (IMD) ಕೊನೆಗೂ ರೈತರಿಗೆ ಸಿಹಿ ಸುದ್ದಿ ನೀಡಿದ್ದು, ನೈರುತ್ಯ ಮುಂಗಾರು ಕೊನೆಗೂ ದೇಶವನ್ನು ಪ್ರವೇಶಿಸಿದೆ. ಗುರುವಾರ ಕೇರಳ ಕರಾವಳಿಗೆ ಅಪ್ಪಳಿಸಿರುವುದಾಗಿ ಐಎಂಡಿ ಅಧಿಕೃತವಾಗಿ ಪ್ರಕಟಿಸಿದೆ. ಈ ಹಿಂದೆ ಹವಾಮಾನ ಇಲಾಖೆ ಜೂನ್ 4 ರಂದು ಕೇರಳಕ್ಕೆ ಮುಂಗಾರು ಅಪ್ಪಳಿಸಲಿದೆ ಎಂದು ಮುನ್ಸೂಚನೆ ನೀಡಿತ್ತು. ಆದರೆ, ಅರಬ್ಬಿ ಸಮುದ್ರದಲ್ಲಿ ಬಿಪರ್ಜೋಯ್ ಎಂಬ ಅತ್ಯಂತ ತೀವ್ರವಾದ ಚಂಡಮಾರುತದ ರಚನೆಯು ಮಾನ್ಸೂನ್ ಆರಂಭವನ್ನು ವಿಳಂಬಗೊಳಿಸಿತು. ಹೀಗಾಗಿ ಹವಾಮಾನ ಇಲಾಖೆ ನಿರೀಕ್ಷಿಸಿದ್ದಕ್ಕಿಂತ ಏಳು ದಿನಗಳ ನಂತರ ಮುಂಗಾರು ದೇಶವನ್ನು ಪ್ರವೇಶಿಸಿದೆ.
ಭಾರತೀಯ ಹವಾಮಾನ ಇಲಾಖೆಯ ಹೇಳಿಕೆಯ ಪ್ರಕಾರ ನೈಋತ್ಯ, ಮಧ್ಯ ಮತ್ತು ಈಶಾನ್ಯ ಬಂಗಾಳ ಕೊಲ್ಲಿಯಲ್ಲಿ ಗುರುವಾರ, ನೈಋತ್ಯ ಮಾನ್ಸೂನ್ ದಕ್ಷಿಣ ಅರೇಬಿಯನ್ ಸಮುದ್ರದ ಉಳಿದ ಭಾಗಗಳು ಮತ್ತು ಮಧ್ಯ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಸಂಪೂರ್ಣ ಲಕ್ಷದ್ವೀಪ ಪ್ರದೇಶಗಳು, ಕೇರಳದ ಹೆಚ್ಚಿನ ಭಾಗಗಳು, ದಕ್ಷಿಣ ತಮಿಳುನಾಡಿನ ಹೆಚ್ಚಿನ ಭಾಗಗಳು, ಕೊಮೊರಿನ್ ಪ್ರದೇಶದ ಉಳಿದ ಭಾಗಗಳು, ಮನ್ನಾರ್ ಕೊಲ್ಲಿ ಮತ್ತು ಇನ್ನೂ ಕೆಲವು ಭಾಗಗಳಿಗೆ ಮುಂದುವರೆದಿದೆ ಎಂದು ಹೇಳಿದೆ.
ಮೊದಲ ವಾರ ಸಾಮಾನ್ಯ ಮಳೆ
ಮುಂಗಾರು ಆರಂಭವಾದ ಕಾರಣ ಕೇರಳದಲ್ಲಿ ಕಳೆದ 24 ಗಂಟೆಗಳಿಂದ ಭಾರೀ ಮಳೆಯಾಗುತ್ತಿದೆ. ಮುಂದಿನ 48 ಗಂಟೆಗಳಲ್ಲಿ, ಕೇರಳದ ಇತರ ಭಾಗಗಳು, ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಚಲಿಸಲು ಹವಾಮಾನ ಪರಿಸ್ಥಿತಿಗಳು ಅನುಕೂಲಕರವಾಗಿವೆ. ಆದರೆ, ಮೊದಲ ವಾರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Post a Comment