ಕಾನೂನು ಎಲ್ಲರಿಗೂ ಒಂದೇ - ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ
ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಾದ ಭಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಶನಿವಾರ ರಾತ್ರಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ.ಭೇಟಿ ವೇಳೆ ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅಪ್ರಾಪ್ತ ವಯಸ್ಕ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ಅವರ ವಿರುದ್ಧ ನಿಷ್ಪಕ್ಷಪಾತ ತನಿಖೆಯಾಗಬೇಕು ಮತ್ತು ತ್ವರಿತ ಕ್ರಮ ತೆಗೆದುಕೊಳ್ಳಬೇಕು ಎಂದು ಕುಸ್ತಿಪಟುಗಳು ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.ಕುಸ್ತಿಪಟುಗಳ ಮನವಿ ಆಲಿಸಿದ ಅಮಿತ್ ಶಾ, ಕಾನೂನು ಎಲ್ಲರಿಗೂ ಒಂದೇ, ಅದು ತನ್ನದೇ ಆದ ಕ್ರಮಗಳನ್ನು ತೆಗೆದುಕೊಳ್ಳಲಿ ಎಂದು ತಿಳಿಸಿದ್ದಾರೆ ಎಂದು ವರದಿಯಾಗಿದ್ದು, ಕಾನೂನು ಹೋರಾಟದಲ್ಲಿ ಹಸ್ತಕ್ಷೇಪ ಮಾಡದಿರುವ ಬಗ್ಗೆ ಸುಳಿವು ನೀಡಿದ್ದಾರೆ ಎನ್ನಲಾಗಿದೆ.ಮೇ 28ರವರೆಗೂ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್ನಲ್ಲಿ ಬ್ರಿಜ್ ಭೂಷಣ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಹೊಸ ಸಂಸತ್ ಉದ್ಘಾಟನೆ ದಿನದಂದು ಪಾರ್ಲಿಮೆಂಟ್ ಬಳಿಗೆ ಮೆರವಣಿಗೆ ಹೊರಟ ಅವರನ್ನು ತಡೆದ ಪೊಲೀಸರು ಅಮಾನವೀಯವಾಗಿ ನಡೆದುಕೊಂಡಿದ್ದರು.

Post a Comment