ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಘಟನೆ -ತಪ್ಪಿತಸ್ಥರ ವಿರುದ್ಧ ಸುಮೊಟೊ ಕೇಸು ದಾಖಲಿಸಬೇಕು -ಯಶ್ ಪಾಲ್ ಸುವರ್ಣ , ಘಟನೆಗೆ ಸಂಬಂಧಪಟ್ಟಂತೆ ಯಾವುದೇ ವಿಡಿಯೋ ನಮಗೆ ಸಿಕ್ಕಿಲ್ಲ -ಎಸ್ಪಿ ಮಚ್ಚೀಂದ್ರ
ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ವಿಚಾರ ತಪ್ಪಿತಸ್ಥ ವಿದ್ಯಾರ್ಥಿನಿಯರ ವಿರುದ್ಧ ಪೊಲೀಸ್ ಇಲಾಖೆ ಸುಮೊಟೊ ಕೇಸು ದಾಖಲಿಸಬೇಕು ಎಂದು ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು,ಉಡುಪಿ ಶೈಕ್ಷಣಿಕವಾಗಿ ಸಾಧನೆ ಮಾಡಿದ ಜಿಲ್ಲೆ.ಮಹಿಳೆಯರಿಗೆ ಗೌರವ ಕೊಡುವ ಜಿಲ್ಲೆ ಈ ಜಿಲ್ಲೆಯಲ್ಲಿ ಮೂರು ಹುಡುಗಿಯರ ವರ್ತನೆಯಿಂದ ತಲೆತಗ್ಗಿಸುವಂತಾಗಿದೆ. ಇದರ ಹಿಂದೆ ಕಾಣದ ಕೈಗಳ ಕೈವಾಡ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶೌಚಾಲಯದಲ್ಲಿ ವಿಡಿಯೋ ಕ್ಯಾಮೆರಾ ಇಟ್ಟಿರುವುದು ಸರಿಯಲ್ಲ. ಇದರಲ್ಲಿ ಬ್ಲಾಕ ಮೇಲ್ ಮಾಡುವ ಷಡ್ಯಂತ್ರ. ಈ ಕುರಿತು ಮುಖ್ಯಮಂತ್ರಿ ಮತ್ತು ಗೃಹ ಮಂತ್ರಿಗಳ ಗಮನಕ್ಕೆ ತರುತ್ತೇನೆ. ಉಡುಪಿ ಜಿಲ್ಲೆಯ ಪೊಲೀಸ್ ಇಲಾಖೆ ಮೇಲೆ ವಿಶ್ವಾಸ ಇದೆ. ವಿಳಂಬ ಮಾಡಿದರೆ ನ್ಯಾಯಕ್ಕಾಗಿ ಹೋರಾಡುತ್ತೇವೆ ಎಂದರು.
ಮುಸ್ಲಿಂ ವಿದ್ಯಾರ್ಥಿನಿಯರ ನಡೆ ಸಂಶಯ ಹುಟ್ಟಿಸುತ್ತಿದೆ. ಜಿಹಾದಿ ಸಂಘಟನೆಗಳ ಕೈವಾಡ ಸಂಶಯ ಇದೆ. ಕಾಲೇಜಿಗೆ ಭೇಟಿ ನೀಡಿ ಮಾತನಾಡುತ್ತೇನೆ. ವಿಡಿಯೋ ಕ್ಲಿಪಿಂಗ್ ಇದಿಯೋ ಇಲ್ಲವೋ ಗೊತ್ತಿಲ್ಲ ಆದರೆ ಸೂಕ್ತ ಕ್ರಮ ಜರುಗಿಸಬೇಕು ಎಂದರು.
ಘಟನೆಯ ಬಗ್ಗೆ ಟ್ವೀಟ್ ಮಾಡಿದ್ದ ರಶ್ಮಿ ಸಾಮಂತ್ ಪೊಲೀಸರಿಂದ ಕಿರುಕುಳ ವಿಚಾರ ಪೊಲೀಸರು ಮನೆಗೆ ಹೋಗಿ ವಿಚಾರಣೆ ಮಾಡಿದ್ದಾರೆ. ರಶ್ಮಿ ಸಾಮಂತ್ ಮನೆಯವರನ್ನು ಭೇಟಿ ಮಾಡಿ ಮಾತನಾಡುತ್ತೇನೆ . ಪ್ರಕರಣಗಳಿಂದ ಶಿಕ್ಷಣ ಸಂಸ್ಥೆಗಳಿಗೆ ಹೊಡೆತ ಬೀಳುತ್ತದೆ ಎಂದರು.
ಉಡುಪಿ ಎಸ್ ಪಿ ಅಕ್ಷಯ್ ಮಚೀಂದ್ರ ಸ್ಪಷ್ಟನೆ:-ವಾಶ್ ರೂಂನಲ್ಲಿ ಹಿಡನ್ ಕ್ಯಾಮೆರಾ ಇಟ್ಟು ಮೂವರು ಅನ್ಯ ಕೋಮಿನ ವಿದ್ಯಾರ್ಥಿನಿಯರು ತಮ್ಮ ಸಹಪಾಠಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಮಾಡಿದ ಘಟನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳಿಗೆ ಉಡುಪಿ ಎಸ್ ಪಿ ಅಕ್ಷಯ್ ಮಚೀಂದ್ರ ಹಾಕೆ ಜು. 25 ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ.
ಘಟನೆಗೆ ಸಂಬಂಧಪಟ್ಟಂತೆ ಯಾವುದೇ ವಿಡಿಯೋ ನಮಗೆ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಕೂಡಾ ನಮ್ಮ ಗಮನಕ್ಕೆ ಬಂದಿಲ್ಲ. ಹೀಗಾಗಿ ಸಾರ್ವಜನಿಕರು ಊಹಾಪೋಹದ ಮಾಹಿತಿಗಳನ್ನು ನಂಬಬಾರದು ಎಂದಿದ್ದಾರೆ.ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಕ್ಷಯ್ ಮಚೀಂದ್ರ, “ಹಿಡನ್ ಕ್ಯಾಮೆರಾ ಅಥವಾ ಅಂತಹ ಯಾವುದೇ ಸಾಧನ ಬಳಸಿರುವ ಯಾವುದೇ ಕುರುಹು ಕಂಡುಬಂದಿಲ್ಲ. ಇಂತಹ ಫೋಟೊ, ವೀಡಿಯೋಗಳನ್ನು ಸೆರೆಹಿಡಿದು ಬ್ಲಾಕ್ಮೇಲ್ ಗೆ ಬಳಸಿಕೊಳ್ಳುತ್ತಿದ್ದಾರೆ ಎಂಬ ವದಂತಿಗಳನ್ನೂ ಹಬ್ಬಿಸಲಾಗುತ್ತಿದೆ. ಆದರೆ ಇಲ್ಲಿಯ ತನಕ ನಮಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣಗಳ ಮೇಲೆ ನಾವೂ ನಿಗಾ ಇಟ್ಟಿದ್ದು ನಮಗೂ ಯಾವುದೇ ವಿಡಿಯೋ ಲಭ್ಯವಾಗಿಲ್ಲ. ಕೆಲವರು ಬೇರೆ ಕಡೆ ಆದ ವಿಡಿಯೋಗಳಿಗೆ ಧ್ವನಿ ಎಡಿಟ್ ಮಾಡಿ ಉಡುಪಿ ಘಟನೆ ಎಂದು ಬಿಂಬಿಸುವ ಪ್ರಸಂಗ ನಡೆದಿದ್ದು, ಅದಕ್ಕೆ ನಾವು ಸ್ಪಷ್ಟನೆ ನೀಡಿದ್ದೇವೆ. ಸಾಮಾಜಿಕ ಜಾಲತಾಣಗಳಲ್ಲಿ ಸತ್ಯಾಂಶ ತಿಳಿಯದೆ ಸುಮ್ಮನೆ ಮಾಹಿತಿ ಹರಡುವುದರಿಂದ ಜನರಿಗೆ ಗೊಂದಲ ಸೃಷ್ಟಿಯಾಗುತ್ತಿದೆ ಎಂದಿದ್ದಾರೆ.
ಯಾವುದೇ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೀಡಿಯೊವನ್ನು ಪ್ರಸಾರ ಮಾಡಲಾಗಿಲ್ಲ, ಯಾರಾದರೂ ವೀಡಿಯೋ ದೊರಕಿದರೆ ಅದನ್ನು ನಮ್ಮ ಗಮನಕ್ಕೆ ತರಬಹುದು. ರಶ್ಮಿ ಸಾವಂತ್ ಹೆಸರಿನಲ್ಲಿ ಟ್ವೀಟ್ ವಿಚಾರ ವಾಗಿ ಪ್ರತಿಕ್ರಿಯಿಸಿರುವ ಅವರು, ಟ್ವಿಟ್ಟರ್ ಖಾತೆಯವರು ಸತ್ಯಾಸತ್ಯತೆಯನ್ನು ಪರಿಶೀಲಿಸಲು ಬಯಸಿದ್ದರು ಬಿಟ್ಟರೆ ಬೇರೆ ಯಾವ ಉದ್ದೇಶವೂ ಇರಲಿಲ್ಲ ಎಂದು ಹೇಳಿದ್ದಾರೆ.
ಯಾವುದೇ ಎಫ್ಐಆರ್ ಅಥವಾ ಯಾವುದೇ ದೂರು ದಾಖಲಾಗಿಲ್ಲ. ನಾವು ಸುಮೋಟೋ ಕೇಸು ದಾಖಲಿಸಲು ಸಾಮಾಜಿಕ ಜಾಲತಾಣದಿಂದ ಯಾವುದೇ ಸಾಕ್ಷಿ ದಾಖಲೆಗಳು ಸಿಕ್ಕಿಲ್ಲ. ಮೊಬೈಲ್ ಪರಿಶೀಲನೆ ಮಾಡಲಾಗಿದೆ, ಅದರಲ್ಲಿಯೂ ಏನೂ ಸಿಕ್ಕಿಲ್ಲ ಎಂದು ಸ್ಪಷ್ಟನೆ ನೀಡಿದರು. ಘಟನೆಗೆ ಸಂಬಂಧಪಟ್ಟಂತೆ ಕಾಲೇಜು ಆಡಳಿತ ಮಂಡಳಿ ಶಿಸ್ತು ಕ್ರಮ ಕೈಗೊಂಡಿದೆ. ಇದನ್ನು ಮೋಜಿಗಾಗಿ ಮಾಡಲಾಗಿದ್ದು ನಂತರ ವೀಡಿಯೊಗಳನ್ನು ಅಳಿಸಲಾಗಿದೆ ಎಂದು ವಿದ್ಯಾರ್ಥಿನಿಯರು ಕಾಲೇಜು ಆಡಳಿತದೊಂದಿಗೆ ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಯಾವುದೇ ಪರಿಶೀಲಿಸದ ವಿಷಯಗಳನ್ನು ಯಾವುದೇ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳದಂತೆ ಎಸ್ಪಿ ಸಾರ್ವಜನಿಕರಿಗೆ ವಿನಂತಿಸಿದ್ದಾರೆ. ಸಾರ್ವಜನಿಕರು ಈ ಬಗ್ಗೆ ಮಾಹಿತಿ ದೊರೆತಲ್ಲಿ ಪೊಲೀಸ್ ಇಲಾಖೆಯ ಗಮನಕ್ಕೆ ತರುವಂತೆ ಮನವಿ ಮಾಡಿದರು.
ತಪ್ಪೊಪ್ಪಿಕೊಂಡ ವಿದ್ಯಾರ್ಥಿನಿಯರನ್ನು ಸಸ್ಪೆಂಡ್ ಮಾಡಿದ್ದೇವೆಂದ ಕಾಲೇಜು:-
ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ ಘಟನೆಗೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಲೇಜು ನಿರ್ದೇಶಕಿ, ಮೂರು ವಿದ್ಯಾರ್ಥಿನಿಯರು ತಪ್ಪು ಒಪ್ಪಿಕೊಂಡಿದ್ದಾರೆ. ಮೂವರನ್ನು ಕೂಡಲೇ ಸಸ್ಪೆಂಡ್ ಮಾಡಿದ್ದೇವೆ. ಸಂತ್ರಸ್ತೆ ಯುವತಿ ಭವಿಷ್ಯದ ದೃಷ್ಟಿಯಿಂದ ದೂರು ಕೊಡಲು ಒಪ್ಪಿಲ್ಲ ಎಂದಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೊಬೈಲ್ ಫೋನ್ ಗಳನ್ನು ಪೊಲೀಸ್ ತನಿಖೆಗೆ ನೀಡಲಾಗಿದೆ. ಕಾಲೇಜಿನಲ್ಲಿರುವ ಎಲ್ಲ ವಿದ್ಯಾರ್ಥಿಗಳು ನಮ್ಮವರೇ ಆಗಿದ್ದಾರೆ. ಇದರಲ್ಲಿ ಜಾತಿ, ಧರ್ಮದ ಪ್ರಶ್ನೆಯೇ ಇಲ್ಲ ಎಂದರು.ಕಾಲೇಜಿಗೆ ಮೊಬೈಲ್ ತರಲು ಅವಕಾಶ ಇಲ್ಲ. ಈ ಕಾರಣಕ್ಕೆ ವಿದ್ಯಾರ್ಥಿಗಳನ್ನು ವಿಚಾರಿಸಲಾಗಿದೆ. ಅಮಾನತುಗೊಂಡ ವಿದ್ಯಾರ್ಥಿಗಳನ್ನು ಕಾನೂನು ಸಲಹೆ ಪಡೆದು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

Post a Comment