ಉಡುಪಿ:ಯುವತಿ ಮೇಲೆ ಪೊಲೀಸರಿಂದ ಹಲ್ಲೆ ಆರೋಪ
ಪೊಲೀಸರು ಮಾಡುವ ಕೆಲವೊಂದು ಕೃತ್ಯಗಳಿಂದ ರಾಜ್ಯದ ಜನರಲ್ಲಿ ಆತಂಕ ಮೂಡಿಸಿದೆ. ಇದೀಗ ಪೊಲೀಸರು ಅಧಿಕಾರಿದ ಅಮಲಿನಲ್ಲಿ ಯುವತಿಯೊಬ್ಬಳ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಅಕ್ಷತಾ ಪೂಜಾರಿ ಎಂಬ ಯುವತಿ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಇದೀಗ ಈ ಆರೋಪ ಕೇಳಿ ಬರುತ್ತಿದ್ದಂತೆ ಬಿಲ್ಲವ ಸಮುದಾಯ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
ಬ್ರಹ್ಮಾವರ ಠಾಣಾ ವ್ಯಾಪ್ತಿಯ ಉಪ್ಪೂರು ನಿವಾಸಿ ಅಕ್ಷತಾ ಪೂಜಾರಿ ಈಗ ಆಸ್ಪತ್ರೆಗೆ ದಾಖಲಾಗಿದ್ದಾರೆ. 2014ರಲ್ಲಿ ದೇವೇಂದ್ರ ಸುವರ್ಣ ಎಂಬವರಿಗೆ ಆಶಿಕ್ ಎಂಬ ಯುವಕ ಬೈಕ್ ಅಪಘಾತ ಮಾಡಿದ್ದ, ಇದರಿಂದ ಅವರಿಗೆ ಗಂಭೀರ ಗಾಯಗಳಾಗಿದ್ದು, ಇಂದಿಗೂ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಆಶಿಕ್ಗೆ 25 ಲಕ್ಷ ಪರಿಹಾರವನ್ನು ನೀಡಬೇಕು ಎಂದು ಆದೇಶ ನೀಡಿತ್ತು. ಆದರೆ ಆಶಿಕ್ ಪರಿಹಾರ ನೀಡದೆ ತಲೆಮರೆಸಿಕೊಂಡಿದ್ದ ಎಂದು ಹೇಳಲಾಗಿತ್ತು. ಆಶಿಕ್ಗಾಗಿ ಪೊಲೀಸರು ಹಲವಾರು ಬಾರಿ ಹುಡುಕಾಟ ನಡೆಸಿದ್ದರು. ಆತ ಉಪ್ಪೂರಿನಲ್ಲಿರುವ ಅಜ್ಜಿಯ ಮನೆಯಲ್ಲಿ ಇದ್ದಾನೆ ಎಂಬ ಲೊಕೇಶನ್ ಆಧಾರದಲ್ಲಿ ಪೊಲೀಸರು ಮುಂಜಾನೆ 4:00 ಗಂಟೆ ವೇಳೆ ದಾಳಿ ನಡೆಸಿದ್ದಾರೆ. ಈ ವೇಳೆ ಅಕ್ಷತಾ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದೆ.
ಪೊಲೀಸರು ಹೇಳುವ ಪ್ರಕಾರ ನ್ಯಾಯಾಲಯದ ಆದೇಶದಂತೆ ಕೆಲಸ ಮಾಡಿದ್ದೇವೆ. ಕಾನೂನು ಪ್ರಕಾರ ಏನು ಮಾಡಬೇಕು ಅದನ್ನು ನಾವು ಮಾಡಿದ್ದೇವೆ. ಜತೆಗೆ ನ್ಯಾಯಾಲಯ ಹೇಳಿದಂತೆ ಆಶಿಕ್ ಮನೆಗೆ ದಾಳಿ ಮಾಡುವ ವೇಳೆ ನಮ್ಮ ಜತೆಗೆ ಕೋರ್ಟ್ ಅಮೀನ್ (ನ್ಯಾಯಾಲಯದಿಂದ ನೇಮಿಸಲ್ಪಟ್ಟ ಅಧಿಕಾರಿ) ಕೂಡ ಇದ್ದರು ಎಂದು ಹೇಳಿದ್ದಾರೆ. ಇನ್ನು ಈ ದಾಳಿಯ ವೇಳೆ ತನ್ನ ಮೇಲೆ ಹಲ್ಲೆಯಾಗಿದೆ ಎಂದು ಆಶಿಕ್ ನ ಸಹೋದರ ಸಂಬಂಧಿ ಅಕ್ಷತಾ ಪೂಜಾರಿ ಆರೋಪಿಸುತ್ತಿದ್ದಾರೆ. ಪೊಲೀಸರು ದಾಳಿಯ ವೇಳೆ ಅವರ ಜತೆಗೆ ಕೋರ್ಟ್ ಅಮೀನ್ ಇರಲಿಲ್ಲ. ಇನ್ನು ಅವರ ಜತೆಗೆ ಒಬ್ಬ ಮಹಿಳಾ ಪೊಲೀಸ್ ಕೂಡ ಇರಲಿಲ್ಲ ಎಂದು ಅಕ್ಷತಾ ಹೇಳಿದ್ದಾರೆ. ಸದ್ಯಕ್ಕೆ ಆಕೆಗೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಕುರಿತು ಅಕ್ಷತಾ ಬ್ರಹ್ಮಾವರ ಪೊಲೀಸರಿಗೆ ದೂರು ನೀಡಿದ್ದು, ಯಾವುದೇ ಎಫ್ಐಆರ್ ದಾಖಲಿಸಿಲ್ಲ. ಇದು ಬಿಲ್ಲವ ಸಂಘಟನೆಗಳನ್ನು ಕೆರಳಿಸಿದೆ. ತಮ್ಮ ಸಮುದಾಯದ ಯುವತಿಗೆ ಅನ್ಯಾಯ ಆಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿಯ ಮೊರೆ ಹೋಗಿದ್ದಾರೆ. ಕ್ರಮ ಕೈಗೊಳ್ಳುವ ಭರವಸೆ ನೀಡಿರುವ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಪ್ರಕರಣದ ಸತ್ಯಾಸತ್ಯತೆ ಪರಿಶೀಲಿಸುತ್ತೇವೆ ಎಂದು ಹೇಳಿದ್ದಾರೆ. ಇದರ ನಡುವೆ ಬಿಲ್ಲವ ಮುಖಂಡರು ಸಭೆಗಳನ್ನು ನಡೆಸಿದ್ದು, ಅಕ್ಷತಾ ಪೂಜಾರಿ ಪರ ಹೋರಾಟಕ್ಕೆ ಸಿದ್ಧತೆ ಆರಂಭಿಸಿದ್ದಾರೆ. ಕಾನೂನು ಪ್ರಕಾರ ಆರೋಪಿಯನ್ನು ಬಂಧಿಸೋದರ ಬದಲಾಗಿ, ಕಾನೂನು ಮೀರಿ ಪೊಲೀಸರು ವರ್ತಿಸಿದ್ದಾರೆ. ಕಾನೂನು ಬಾಹಿರವಾಗಿ ಕೋರ್ಟ್ ಅಮೀನರನ್ನು ಕರೆತರದೆ ದಾಳಿ ಮಾಡಿದ್ದಾರೆ. ಕಾರ್ಯಾಚರಣೆ ನಡೆಸಿದ ಪೊಲೀಸರನ್ನು ಅಮಾನತು ಮಾಡಬೇಕು. ಅಕ್ಷತಾ ನೀಡಿರುವ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಿಸಬೇಕು. ಅಕ್ಷತಾ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಪೊಲೀಸರ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಬಿಲ್ಲವ ಮುಖಂಡ ಪ್ರವೀಣ್ ಪೂಜಾರಿ ಒತ್ತಾಯಿಸಿದ್ದಾರೆ.
ಜಿಲ್ಲಾ ಕಾರ್ಯದರ್ಶಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮನೆಗೆ ಭೇಟಿ ಕೊಟ್ಟು ಅಕ್ಷತಾ ಪೂಜಾರಿ ಮೇಲೆ ಹಲ್ಲೆ ನಡೆಸಿ ಪುನಃ ಅವರ ಮೇಲೆಯೇ ಕರ್ತವ್ಯ ಲೋಪದ ಅಡಿಯಲ್ಲಿ ಕೇಸು ದಾಖಲಿಸಿರುವುದು ಅತ್ಯಂತ ಖಂಡನೀಯ.ಸಾರ್ವಜನಿಕರಿಗೆ ನ್ಯಾಯ ದೊರಕಿಸಿಕೊಡಬೇಕಾದ ಪೋಲಿಸರೇ ಈ ರೀತಿಯಾಗಿ ವರ್ತಿಸಿರುವುದು ಎಷ್ಟು ಸರಿ??
ಅಕ್ಷತಾ ಪೂಜಾರಿ ಮೇಲೆ ಪೊಲೀಸ್ ಹಲ್ಲೆ ಪ್ರಕರಣ: ʼತಪ್ಪಿತಸ್ಥ ಪೊಲೀಸರ ವಿರುದ್ಧ ಕೇಸ್ ದಾಖಲಿಸಿʼ : ಉಡುಪಿ ಶಾಸಕ ಯಶ್ ಪಾಲ್ ಸುವರ್ಣ
ಆರೋಪಿಯನ್ನು ಹುಡುಕುವ ನೆಪದಲ್ಲಿ ಬೆಳ್ಳಂಬೆಳಗ್ಗೆ ಅಕ್ಷತಾ ಪೂಜಾರಿ ಮನೆಗೆ ಅಕ್ರಮವಾಗಿ ಪ್ರವೇಶ ಮಾಡಿರುವ ಪೊಲೀಸ್ ಅಧಿಕಾರಿಗಳ ವಿರುದ್ದ ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿರುವ ಆರೋಪಿಯ ಚಿಕ್ಕಮ್ಮನ ಮನೆಗೆ ಮಹಿಳಾ ಪೋಲಿಸರು ಇಲ್ಲದೇ, ಕೇವಲ ಪುರುಷ ಪೋಲಿಸರು ನುಗ್ಗಿ, ಯುವತಿ ಮೇಲೆ ಹಲ್ಲೆ ನಡೆಸಿದ್ದು, ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಯುವತಿ ದೂರು ಕೊಟ್ಟಾಗ ಠಾಣಾಧಿಕಾರಿಗಳು ಆಕೆಯ ಕೇಸನ್ನು ದಾಖಲಿಸದೆ ಪೊಲೀಸರನ್ನು ರಕ್ಷಿಸುವ ಸಲುವಾಗಿ ಅಕ್ಷತಾ ಪೂಜಾರಿ ಮತ್ತು ಆಕೆಯ ತಾಯಿಯ ಮೇಲೆ ಕರ್ತವ್ಯಕ್ಕೆ ಅಡ್ಡಿ ಎಂಬ ಸುಳ್ಳು ಕೇಸು ದಾಖಲಿಸಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.
ಈ ಪ್ರಕರಣವನ್ನು ಪೊಲೀಸ್ ವರಿಷ್ಠಾಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥ ಪೊಲೀಸರ ವಿರುದ್ಧ ಕೇಸು ದಾಖಲಿಸಿ ಯುವತಿಗೆ ನ್ಯಾಯ ಒದಗುವಂತೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

Post a Comment