ಲೈಂಗಿಕ ದೌರ್ಜನ್ಯ ಪ್ರಕರಣ : ಹೆಚ್.ಡಿ ರೇವಣ್ಣ ನಿರ್ದೋಷಿ
ಈ ಮೂಲಕ ಕೊನೆಗೂ ರೇವಣ್ಣ ಕುಟುಂಬಕ್ಕೆ ಒಂದು ಸಿಹಿಸುದ್ದಿ ಸಿಕ್ಕಿದೆ. ಸದ್ಯ ರೇವಣ್ಣ ಆರೋಪಮುಕ್ತವಾಗಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮನೆಕೆಲಸದಾಕೆ ನೀಡಿದ ದೂರಿಗೆ ಸಂಬಂಧಿಸಿದಂತೆ ಹೆಚ್ ಡಿ ರೇವಣ್ಣ ನಿರ್ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು (ಡಿ.29) ತೀರ್ಪು ನೀಡಿದೆ.
ಪ್ರಕರಣದ ಹಿನ್ನೆಲೆ:
ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್ ಡಿ ರೇವಣ್ಣ ಹಾಗೂ ಅವರ ಮಗ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ 2024ರ ಏ.28ರಂದು ಪ್ರಕರಣ ದಾಖಲಿಸಲಾಗಿತ್ತು.
ಸಂತ್ರಸ್ತೆಯ ದೂರು ಆಧರಿಸಿ ಐಪಿಸಿ ಸೆಕ್ಷನ್ ಪ್ರಕರಣ 354A, 354D, 506, 509ರ ಅಡಿ ಪ್ರಕರಣ ದಾಖಲಿಸಲಾಗಿದ್ದು, ರೇವಣ್ಣ ಅವರನ್ನು ಮೊದಲನೇ ಆರೋಪಿ ಹಾಗೂ ಪ್ರಜ್ವಲ್ನನ್ನು ಎರಡನೇ ಆರೋಪಿಯನ್ನಾಗಿ ಹೆಸರಿಸಲಾಗಿತ್ತು.
ರೇವಣ್ಣ ಅವರು, ತಮ್ಮ ಪತ್ನಿ ಭವಾನಿಯವರು ಮನೆಯಲ್ಲಿ ಇಲ್ಲದಿದ್ದ ವೇಳೆ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗುತಿದ್ದರು. ಅಲ್ಲದೆ ತಮ್ಮ ಮಗಳಿಗೂ ಅಸಭ್ಯ ಸಂಭಾಷಣೆ ಮೂಲಕ ಪ್ರಚೋದನೆ ನೀಡಿದ್ದು, ಮಗಳು ಹೆದರಿ ನಂಬರ್ ಬ್ಲಾಕ್ ಮಾಡಿಕೊಂಡಿದ್ದಳು. ಇದರಿಂದ ತಾನು ಕೆಲಸ ತೊರೆದಿದ್ದಾಗಿ ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದರು.
ಪ್ರಜ್ವಲ್ ರೇವಣ್ಣ ನಡೆಸಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಹಾಗೆ ಲೈಂಗಿಕ ದೌರ್ಜನ್ಯಕ್ಕೊಳಗಾದ ಒಬ್ಬ ಮಹಿಳೆ ತನ್ನೊಂದಿಗೆ ಕೆಲಸ ಮಾಡುತ್ತಿದ್ದರು. ಆಕೆಯೊಂದಿಗೆ ಪ್ರಜ್ವಲ್ ರೇವಣ್ಣ ನಡೆಸಿರುವ ಲೈಂಗಿಕ ದೌರ್ಜನ್ಯದ ವಿಡಿಯೋ ನೋಡಿ ಭಯವಾಗಿದ್ದು, ತನ್ನ ಗಂಡ ಕೂಡ ತನ್ನ ಶೀಲ ಶಂಕಿಸುತ್ತಿದ್ದಾರೆ. ವಿಡಿಯೋ ಬಹಿರಂಗಗೊಂಡರೆ ಗತಿ ಏನು ಎಂದು ಆತಂಕ ವ್ಯಕ್ತಪಡಿಸಿದ್ದಳು. ಇದರಿಂದ ಮಾನಸಿಕ ಹಿಂಸೆ ಆಗಿದೆ ಎಂದು ಅಂದು ದೂರಿನಲ್ಲಿ ಮಹಿಳೆ ವಿವರಿಸಿದ್ದರು.
ಜೀವ ಭಯ ಇರುವುದರಿಂದ ತಮಗೆ ಹಾಗೂ ತಮ್ಮ ಮಗಳ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಎಚ್ ಡಿ ರೇವಣ್ಣ ಹಾಗೂ ಪ್ರಜ್ವಲ್ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿದ್ದರು.
ಸೂರಜ್ ರೇವಣ್ಣ ಕೇಸ್ ಬಿ ರಿಪೋರ್ಟ್
ಯುವಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮತ್ತು ಜೀವ ಬೆದರಿಕೆಯೊಡ್ಡಿದ ಆರೋಪ ಎದುರಿಸುತ್ತಿರುವ ವಿಧಾನ ಪರಿಷತ್ನ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಎರಡನೇ ಎಫ್ಐಆರ್ಗೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ವಿಚಾರಣಾ ನ್ಯಾಯಾಲಯಕ್ಕೆ 'ಬಿ' ಅಂತಿಮ ವರದಿ ಸಲ್ಲಿಸಿದ್ದರು.
ಹೊಳೆ ನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದ ಎರಡನೇ ಎಫ್ಐಆರ್ ಕುರಿತಂತೆ ತನಿಖೆ ನಡೆಸಿದ್ದ ತನಿಖಾಧಿಕಾರಿಗಳು ʼಬಿʼ ಅಂತಿಮ ವರದಿಯನ್ನು 42ನೇ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಈಗಾಗಲೇ ಸಲ್ಲಿಕೆ ಮಾಡಿದ್ದಾರೆ.
ಸೂರಜ್ ರೇವಣ್ಣ ಬ್ರಿಗೇಡ್ ಖಜಾಂಚಿ ನೀಡಿದ ದೂರಿನ ಆಧಾರದಡಿ ಸೂರಜ್ ರೇವಣ್ಣ ವಿರುದ್ಧ 2024ರ ಜೂನ್ 22ರಂದು ಪ್ರಕರಣ ದಾಖಲಾಗಿತ್ತು. ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದು, ಆರೋಪಕ್ಕೆ ಸಂಬಂಧಿಸಿದಂತೆ ಸೂಕ್ತ ಸಾಕ್ಷ್ಯಾಧಾರ ಲಭ್ಯವಿಲ್ಲ ಎಂಬ ಕಾರಣ ನೀಡಿ 'ಬಿ' ಅಂತಿಮ ವರದಿ ಸಲ್ಲಿಸಿದ್ದರು.

Post a Comment