".

Header Ads

ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ


ಸಮವಸ್ತ್ರ, ಶೂ, ಬಿಸಿ ಊಟ ಸೇರಿದಂತೆ ಹಲವಾರು ಆಕರ್ಷಕ ಸೌಲಭ್ಯಗಳನ್ನು ಒದಗಿಸುತ್ತಿದ್ದರೂ, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಕಡಿಮೆಯಾಗುತ್ತಿರುವುದು ರಾಜ್ಯ ಸರ್ಕಾರದ ಕಳವಳಕ್ಕೆ ಕಾರಣವಾಗಿದೆ.
ಸೋಮವಾರ ನಡೆದ ವಿಧಾನ ಪರಿಷತ್ ಅಧಿವೇಶನದಲ್ಲಿ ಬಿಜೆಪಿ ಸದಸ್ಯ ನಿರಾಣಿ ಹನುಮಂತ್ ರುದ್ರಪ್ಪ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಸರ್ಕಾರಿ ಶಾಲೆಗಳ ಪ್ರಸ್ತುತ ಸ್ಥಿತಿಗತಿಯ ಕುರಿತು ಬೇಸರ ವ್ಯಕ್ತಪಡಿಸಿದರು. ಕಳೆದ ಕೇವಲ ಮೂರು ವರ್ಷಗಳಲ್ಲಿಯೇ ರಾಜ್ಯದ ಕನ್ನಡ ಮಾಧ್ಯಮ ಶಾಲೆಗಳ ದಾಖಲಾತಿಯಲ್ಲಿ ಸುಮಾರು ಶೇಕಡಾ 11.20 ರಷ್ಟು ತೀವ್ರ ಕುಸಿತ ಉಂಟಾಗಿದೆ ಎಂಬ ಆತಂಕಕಾರಿ ಅಂಕಿ-ಅಂಶವನ್ನು ಅವರು ಸದನದ ಮುಂದಿಟ್ಟರು.

 
ಕುಸಿತಕ್ಕೆ ಕಾರಣವೇನು? 


ದಾಖಲಾತಿ ಕುಸಿತಕ್ಕೆ ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಆರಂಭ ಕಾರಣವಲ್ಲ ಎಂಬುದನ್ನು ಸ್ಪಷ್ಟಪಡಿಸಿದ ಸಚಿವರು, ಇಂದಿನ ಪೋಷಕರಲ್ಲಿ ಹೆಚ್ಚುತ್ತಿರುವ ಇಂಗ್ಲಿಷ್ ಮಾಧ್ಯಮ ಶಿಕ್ಷಣದ ಮೇಲಿನ ವ್ಯಾಮೋಹವೇ ಇದಕ್ಕೆ ಪ್ರಮುಖ ಕಾರಣ ಎಂದರು. ಇದರ ಜೊತೆಗೆ, ಸಿಬಿಎಸ್‌ಇ ಮತ್ತು ಐಸಿಎಸ್‌ಇ ನಂತಹ ರಾಷ್ಟ್ರೀಯ ಪಠ್ಯಕ್ರಮಗಳತ್ತ ಪೋಷಕರ ಆಕರ್ಷಣೆ ಹಾಗೂ ರಾಜ್ಯಾದ್ಯಂತ ನಾಯಿಕೊಡೆಗಳಂತೆ ಹುಟ್ಟಿಕೊಳ್ಳುತ್ತಿರುವ ಖಾಸಗಿ ಶಾಲೆಗಳ ಹಾವಳಿಯಿಂದಾಗಿ ಸರ್ಕಾರಿ ಶಾಲೆಗಳು ವಿದ್ಯಾರ್ಥಿಗಳ ಕೊರತೆ ಎದುರಿಸುತ್ತಿವೆ ಎಂದು ವಿವರಿಸಿದರು.

ಸರ್ಕಾರದ ಮುಂದಿನ ಹೆಜ್ಜೆಗಳು

 
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಯನ್ನು ಮರಳಿ ಹೆಚ್ಚಿಸಲು ರಾಜ್ಯ ಸರ್ಕಾರವು ಶೀಘ್ರದಲ್ಲೇ ಬೃಹತ್ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಿದೆ. ಈ ನಿಟ್ಟಿನಲ್ಲಿ, ಎಲ್ಲಾ ಸ್ಥಳೀಯ ಜನಪ್ರತಿನಿಧಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪೋಷಕರ ಮನವೊಲಿಸಿ, ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಸಹಕಾರ ನೀಡಬೇಕು ಎಂದು ಸಚಿವರು ಇದೇ ವೇಳೆ ಮನವಿ ಮಾಡಿದರು.

ಮಕ್ಕಳನ್ನು ಆಕರ್ಷಿಸಲು ಈಗಾಗಲೇ 1ನೇ ತರಗತಿಯಿಂದ 5ನೇ ತರಗತಿಯವರೆಗೆ ದ್ವಿಭಾಷಾ (ಕನ್ನಡ ಮತ್ತು ಇಂಗ್ಲಿಷ್) ಮಾಧ್ಯಮ ತರಗತಿಗಳನ್ನು ಆರಂಭಿಸಲಾಗಿದೆ. ಅತ್ಯುತ್ತಮ ಮೂಲಸೌಕರ್ಯ ಹಾಗೂ ಹೆಚ್ಚಿನ ವಿದ್ಯಾರ್ಥಿ ಬಲ ಹೊಂದಿರುವ ಆಯ್ದ ಕೆಲವು ಸರ್ಕಾರಿ ಶಾಲೆಗಳನ್ನು 'ಕೆಪಿಎಸ್' ಮಾದರಿಯಲ್ಲಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಈ ಶಾಲೆಗಳಲ್ಲಿ ಪೂರ್ವ-ಪ್ರಾಥಮಿಕ (ಪ್ರೀ-ಪ್ರೈಮರಿ) ಹಂತದಿಂದ ಪಿಯುಸಿ ವರೆಗೆ ಒಂದೇ ಸೂರಿನಡಿ ಶಿಕ್ಷಣ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಪಿಎಸ್ ಆರಂಭಿಸುವ ವಿಚಾರದಲ್ಲಿ ಶಾಲೆಗಳನ್ನು ವಿಲೀನಗೊಳಿಸಲಾಗುತ್ತಿದೆ ಅಥವಾ ಮುಚ್ಚಲಾಗುತ್ತಿದೆ ಎಂಬುವುದು ಕೇವಲ ವದಂತಿಗಳಷ್ಟೇ. ಯಾವುದೇ ಕಾರಣಕ್ಕೂ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದರು.ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಶಿಕ್ಷಕ ಪ್ರತಿನಿಧಿ ವಿ.ಎನ್. ರಾಜಶೇಖರ್, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಮೊದಲು ಶಿಕ್ಷಕರ ನೇಮಕಾತಿಗೆ ಹೆಚ್ಚಿನ ಆದ್ಯತೆ ನೀಡಬೇಕು ಹಾಗೂ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಒತ್ತಾಯಿಸಿದರು. 

ಪ್ರಸ್ತುತ ಪ್ರಾಥಮಿಕ ಶಾಲೆಗಳ ನಿರ್ವಹಣೆಗೆ ವಾರ್ಷಿಕ ಕೇವಲ 10,000 ದಿಂದ 15,000 ರೂಪಾಯಿ, ಉನ್ನತ ಪ್ರಾಥಮಿಕ ಶಾಲೆಗಳಿಗೆ 20,000 ರೂಪಾಯಿ ಮತ್ತು ಪ್ರೌಢಶಾಲೆಗಳಿಗೆ ಕೇವಲ 22,000 ದಿಂದ 25,000 ರೂಪಾಯಿ ಅನುದಾನ ನೀಡಲಾಗುತ್ತಿದೆ. ಈ ಅಲ್ಪ ಮೊತ್ತವು ಶಾಲೆಗಳ ಸ್ವಚ್ಛತೆ ಮತ್ತು ಸಣ್ಣಪುಟ್ಟ ದುರಸ್ತಿ ಕಾರ್ಯಗಳಿಗೂ ಸಾಕಾಗುವುದಿಲ್ಲ ಎಂದು ವಾಸ್ತವವನ್ನು ಬಿಚ್ಚಿಟ್ಟರು. ಇದಕ್ಕೆ ಪೂರಕವಾಗಿ ಬಿಜೆಪಿ ಎಂಎಲ್‌ಸಿ ಎಚ್.ಎಸ್. ಗೋಪಿನಾಥ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ, "ಶಿಕ್ಷಕರಿಲ್ಲದ ಶಾಲೆಗಳು ಪೂಜಾರಿಯಿಲ್ಲದ ದೇವಸ್ಥಾನಗಳಿದ್ದಂತೆ" ಎಂದು ಮಾರ್ಮಿಕವಾಗಿ ನುಡಿದರು. ರಾಜ್ಯದಲ್ಲಿ ಶೀಘ್ರದಲ್ಲೇ 15,000 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಅಲ್ಲದೆ, ಪ್ರಸ್ತುತ ಇರುವ ಸರ್ಕಾರಿ ಶಾಲಾ ಶಿಕ್ಷಕರ ಇಂಗ್ಲಿಷ್ ಬೋಧನಾ ಸಾಮರ್ಥ್ಯವನ್ನು ಹೆಚ್ಚಿಸಲು ವಿಶೇಷ ತರಬೇತಿ ನೀಡಲು ಬಜೆಟ್‌ನಲ್ಲಿಯೇ ಪ್ರತ್ಯೇಕ ಅನುದಾನ ಮೀಸಲಿಡಲಾಗಿದೆ ಎಂದು ಭರವಸೆ ನೀಡಿದರು. ಬಿಜೆಪಿ ಎಂಎಲ್‌ಸಿ ವಿವೇಕಾನಂದ ಅವರು, "ರಾಷ್ಟ್ರೀಯ ಪಠ್ಯಕ್ರಮದ (ಐಸಿಎಸ್‌ಇ ಮತ್ತು ಸಿಬಿಎಸ್‌ಇ) ಶಾಲೆಗಳಲ್ಲಿ ಪ್ರತಿ 45 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕರಿದ್ದರೆ, ನಮ್ಮ ಸರ್ಕಾರಿ ಶಾಲೆಗಳಲ್ಲಿ 320 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕರಿರುವ ಪರಿಸ್ಥಿತಿ ಇದೆ. ಇದು ಶಿಕ್ಷಣದ ಗುಣಮಟ್ಟವನ್ನು ಕುಸಿಯುವಂತೆ ಮಾಡಿದೆ. ಈ ಅನುಪಾತವನ್ನು ತುರ್ತಾಗಿ ಸರಿಪಡಿಸಬೇಕು" ಎಂದು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಸಚಿವರು, "320 ವಿದ್ಯಾರ್ಥಿಗಳು ಒಂದೇ ಕೊಠಡಿಯಲ್ಲಿ ಒಟ್ಟಿಗೆ ಪಾಠ ಕೇಳುವುದಿಲ್ಲ. ಅವರನ್ನು ನಿಯಮಾವಳಿ ಪ್ರಕಾರ ಪ್ರತ್ಯೇಕ ವಿಭಾಗಗಳಾಗಿ (ಸೆಕ್ಷನ್) ವಿಂಗಡಿಸಲಾಗಿದೆ. ಆದಾಗ್ಯೂ, ಶಿಕ್ಷಕ-ವಿದ್ಯಾರ್ಥಿ ಅನುಪಾತವನ್ನು ಇನ್ನಷ್ಟು ಉತ್ತಮಪಡಿಸುವ ವಿನಂತಿಯನ್ನು ಪರಿಶೀಲಿಸಲಾಗುವುದು" ಎಂದು ಹೇಳಿದರು.


 

 
 
Powered by Blogger.