ಮತಾಂತರಗೊಂಡವರಿಗೆ ಪರಿಶಿಷ್ಟ ಜಾತಿ ಮೀಸಲಾತಿ ಇಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯು ತನ್ನ ಹಳೆಯ ಧರ್ಮದ ಸೌಲಭ್ಯಗಳನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ವಿಶೇಷವಾಗಿ, ದಲಿತ ವ್ಯಕ್ತಿಯೊಬ್ಬರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು ಆ ನಂಬಿಕೆಯನ್ನು ಅನುಸರಿಸುತ್ತಿದ್ದರೆ, ಅವರು ‘ಪರಿಶಿಷ್ಟ ಜಾತಿ’ (SC) ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಮನಮೋಹನ್ ಅವರನ್ನೊಳಗೊಂಡ ಪೀಠವು ಈ ಮಹತ್ವದ ಆದೇಶವನ್ನು ಪ್ರಕಟಿಸಿದೆ. ಆಂಧ್ರಪ್ರದೇಶದ ಪಾದ್ರಿ ಚಿಂತಾಡ ಆನಂದ್ ಎಂಬುವವರು ಅಕ್ಕಲ ರಾಮಿರೆಡ್ಡಿ ಮತ್ತು ಇತರರ ವಿರುದ್ಧ ಜಾತಿ ನಿಂದನೆ ಆರೋಪ ಮಾಡಿ ಎಸ್ಸಿ/ಎಸ್ಟಿ ಕಾಯ್ದೆಯಡಿ ದೂರು ದಾಖಲಿಸಿದ್ದರು. ಆದರೆ, ರಾಮಿರೆಡ್ಡಿ ಅವರು ಈ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ವಿಚಾರಣೆ ನಡೆಸಿದ್ದ ಆಂಧ್ರಪ್ರದೇಶ ಹೈಕೋರ್ಟ್, ಆನಂದ್ ಅವರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿರುವುದರಿಂದ ಅವರು ಎಸ್ಸಿ ಸ್ಥಾನಮಾನವನ್ನು ಕಳೆದುಕೊಂಡಿದ್ದಾರೆ. ಆದ್ದರಿಂದ ಅವರು ಎಸ್ಸಿ/ಎಸ್ಟಿ ಕಾಯ್ದೆಯಡಿ ರಕ್ಷಣೆ ಪಡೆಯಲು ಸಾಧ್ಯವಿಲ್ಲ ಎಂದು ಎಫ್ಐಆರ್ ಅನ್ನು ರದ್ದುಗೊಳಿಸಿತ್ತು. ಈ ತೀರ್ಪನ್ನು ಈಗ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಪ್ರಸ್ತುತ ಕಾನೂನಿನ ಅನ್ವಯ ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಕ್ಕೆ ಸೇರಿದ ವ್ಯಕ್ತಿಗಳು ಮಾತ್ರ ಪರಿಶಿಷ್ಟ ಜಾತಿಯ ಸ್ಥಾನಮಾನವನ್ನು ಪಡೆಯಲು ಅರ್ಹರು. ಕ್ರಿಶ್ಚಿಯನ್ ಧರ್ಮದಂತಹ ಇತರ ಧರ್ಮಗಳಿಗೆ ಮತಾಂತರಗೊಂಡ ವ್ಯಕ್ತಿಯು ಎಸ್ಸಿ ಸ್ಥಾನಮಾನ ಕಳೆದುಕೊಳ್ಳುವುದರಿಂದ, ಅವರು ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ’ಯಡಿ ದೂರು ದಾಖಲಿಸಲು ಸಾಧ್ಯವಿಲ್ಲ.ಪ್ರಸ್ತುತ ಪ್ರಕರಣದಲ್ಲಿ ಅರ್ಜಿದಾರರು ಕ್ರಿಶ್ಚಿಯನ್ ಧರ್ಮದಿಂದ ತಮ್ಮ ಮೂಲ ಧರ್ಮಕ್ಕೆ ಮರು ಮತಾಂತರಗೊಂಡಿಲ್ಲ ಅಥವಾ ಮಡಿಕಾ ಸಮುದಾಯಕ್ಕೆ ಮರಳಿ ಸೇರ್ಪಡೆಯಾಗಿಲ್ಲ ಎಂದು ಪೀಠವು ಗಮನಿಸಿದೆ.
ಯಾವುದೇ ವ್ಯಕ್ತಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು ಆ ನಂಬಿಕೆಯನ್ನು ಬಹಿರಂಗವಾಗಿ ಪ್ರತಿಪಾದಿಸಿದರೆ, ಅವರು ತಾಂತ್ರಿಕವಾಗಿ ಪರಿಶಿಷ್ಟ ಜಾತಿ ಸಮುದಾಯದ ಸದಸ್ಯರಾಗಿ ಉಳಿಯುವುದಿಲ್ಲ. ಮತಾಂತರದ ನಂತರವೂ ಮೂಲ ಧರ್ಮದ ಸೌಲಭ್ಯಗಳನ್ನು ಪಡೆಯುವುದು ಕಾನೂನುಬಾಹಿರ ಎಂದು ಈ ತೀರ್ಪು ಸ್ಪಷ್ಟಪಡಿಸಿದೆ.

Post a Comment